ಡಿಜಿಪಿ ಹುದ್ದೆಯಿಂದ ಓಂ ಪ್ರಕಾಶ್ ಅವರನ್ನು ಬದಲಾವಣೆ ಮಾಡಿ ಅವರ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡುವಂತೆ ಆಡಳಿತ ಇಲಾಖೆ ಸಲ್ಲಿಸಿದ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿರಸ್ಕರಿಸಿದ್ದಾರೆ.
ಡಿಜಿಪಿ ಓಂ ಪ್ರಕಾಶ್ ಅವರನ್ನು 5 ತಿಂಗಳ ಕಾಲ ಕಡ್ಡಾಯ ರಜೆಯ ಮೇಲೆ ಕಳುಹಿಸಿ ಅವರ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡುವಂತೆ ಆಡಳಿತ ಇಲಾಖೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಆದರೆ, ಇಂದು ನಡೆದ ಗೃಹ ಇಲಾಖೆ ಹಾಗೂ ಆಡಳಿತ ಇಲಾಖೆಯ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಡಳಿತ ಇಲಾಖೆ ಸಲ್ಲಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ.
ಓಂ ಪ್ರಕಾಶ್ ಅವರು ಇನ್ನೂ 5 ತಿಂಗಳ ಕಾಲ ಡಿಜಿಪಿ ಹುದ್ದೆಯಲ್ಲಿ ಮುಂದುವರೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ.
ಮೊದಲು ಗೃಹ ಸಚಿವರ ಸಲಹೆಗಾರ ಕೆಂಪಯ್ಯನವರನ್ನು ವಜಾಗೊಳಿಸಿ ಆವಾಗ ಪೊಲೀಸ್ ಇಲಾಖೆ ತಂತಾನೆ ಸುಧಾರಣೆಯಾಗುತ್ತದೆ. ಒಂದು ವೇಳೆ, ಡಿಜಿಪಿ ಓಂ ಪ್ರಕಾಶ್ ಅವರನ್ನು ವರ್ಗಾವಣೆಗೊಳಿಸುವುದರಿಂದ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಐಪಿಎಸ್ ಅಧಿಕಾರಿಗಳು ಸರಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದರು.
ಡಿಜಿಪಿ ಓಂಪ್ರಕಾಶ್ ಅವರನ್ನು ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬಾರದು ಎಂದು ಐಪಿಎಸ್ ಮತ್ತು ಎಡಿಜಿಪಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗುತ್ತಿತ್ತು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.